ಇತಿಹಾಸ ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವೈಭವದ ಶ್ರೀ ಮನ್ಮಹಾರಥೋತ್ಸವ ಸಂಪನ್ನ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಪುರಾಣ ಹಾಗೂ ಇತಿಹಾಸ ಪ್ರಸಿದ್ದವಾದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವೈಭವದ ಶ್ರೀ ಮನ್ಮಹಾರಥೋತ್ಸವ ಬುಧವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀ ದೇವಿಯ ವಿಜ್ರಂಭಣೆಯ ಉತ್ಸವಕ್ಕೆ ಆಸು ಪಾಸಿನ ಗ್ರಾಮಗಳಿಂದ, ರಾಜ್ಯದ ವಿವಿಧ ಭಾಗಗಳಿಂದ ಹೊರರಾಜ್ಯದಿಂದ ಹಾಗೂ ವಿದೇಶದಿಂದ ಬಂದಿದ್ದ ದೊಡ್ಡ ಸಂಖ್ಯೆಯ ಭಕ್ತರು ಸಾಕ್ಷಿಗಳಾದರು.

ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ರಥೋತ್ಸವದ ಆಚರಣೆಯಲ್ಲಿ ಅತ್ಯಂತ ಪ್ರಮುಖ ವಿಧಿಗಳನ್ನು ಪೂರೈಸುವ ತಂತ್ರಿ ರಾಮಚಂದ್ರ ಅಡಿಗಳ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ 12.30 ರ ಮುಥುನ ಲಗ್ನದಲ್ಲಿ ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಗರ್ಭಗುಡಿಯಿಂದ ತರಲಾದ ಜೋಡಿ (ಎರಡು) ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥ ಪೂಜೆ ನಡೆಸಿದ ಬಳಿಕ, ಸಾವಿರಾರು ಭಕ್ತರ ಜಯಘೋಷದ ನಡುವೆ, ಬೀದಿ ಗಣಪತಿ ದೇವಸ್ಥಾನದವರೆಗೆ ರಥೋತ್ಸವ ನಡೆಸಲಾಯಿತು. ಸಂಜೆ 5 ಗಂಟೆಯ ಬಳಿಕ ಬ್ರಹ್ಮರಥದಲ್ಲಿ ದೇವರನ್ನು ಕುರಿಸಿ ರಥಬೀದಿಯಲ್ಲಿ ಬ್ರಹ್ಮರಥವನ್ನು ಶಂಕರಾಶ್ರಮದವರೆಗೆ ಕೊಂಡೊಯ್ಯಲಾಯಿತು. ಜಾತ್ರೆಯ ತೇರಿನ ಈ ವೈಭವಕ್ಕೆ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಭಕ್ತರು ಸಾಕ್ಷೀಯಾದರು. ರಥಬೀದಿಯ ಸಂಭ್ರಮದ ಉತ್ಸವಾಚರಣೆಯ ಬಳಿಕ ಶ್ರೀ ದೇವರನ್ನು ರಥದಿಂದ ಇಳಿಸಿ ದೇವಸ್ಥಾನದ ಒಳಗೆ ಕೊಂಡೊಯ್ಯಲಾಯಿತು.
ದೇವಸ್ಥಾನದ ತಂತ್ರಿ ಕೆ.ರಾಮಚಂದ್ರ ಅಡಿಗರ ನೇತೃತ್ವದಲ್ಲಿ ಪೂಜಾ ವಿಧಾನಗಳು ನಡೆಯಿತು ಹಿರಿಯ ಖುತ್ವೀಜರಾದ ಕೆ.ಎನ್.ನರಸಿಂಹ‌ ಅಡಿಗ, ಶ್ರೀಧರ ಅಡಿಗ, ಕೆ.ಎನ್.ಗೋವಿಂದ ಅಡಿಗ, ಸುಬ್ರಹ್ಮಣ್ಯ ಅಡಿಗ, ವಿಘ್ನೇಶ್ ಅಡಿಗ‌ ಇದ್ದರು. ಕಳೆದ ಕೆಲ ವರ್ಷಗಳಿಂದ ಜಾರಿಯಲ್ಲಿ ಇದ್ದ ಕೋವಿಡ್ 19 ನಿಯಮಗಳು ಈ ಬಾರಿಯ ರಥೋತ್ಸವದಲ್ಲಿ ಇಲ್ಲದೆ ಇದ್ದುದರಿಂದ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ನೇತ್ರತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಮಾ.5 ರಂದು ಗಣಪತಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಶ್ರೀ ಕ್ಷೇತ್ರದ ವಾರ್ಷಿಕ ಉತ್ಸವಾಚರಣೆಯ ಅಂಗವಾಗಿ ಪ್ರತಿ ದಿನವೂ ವಿಶೇಷ ಉತ್ಸವಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಾ.9 ರಂದು ಮಾಂಗಲ್ಯೋತ್ಸವ ಮಯೂರಾರೋಹಣೋತ್ಸವ, ಮಾ.10 ರಂದು ಡೋಲಾರೋಹಣೋತ್ಸವ, ಮಾ.11 ರಂದು ಪುಷ್ಪಮಂಟಪಾರೋಹಣೋತ್ಸವ, ಮಾ.12 ರಂದು ವೃಷಭಾರೋಹಣೋತ್ಸವ, ಮಾ.13 ರಂದು ಗಜಾರೋಹಣೋತ್ಸವ, ಮಾ.14 ರಂದು ಸಿಂಹಾರೋಹಣೋತ್ಸವ ಆಚರಣೆಗಳನ್ನು ನಡೆಸಲಾಗಿತ್ತು. ಗುರುವಾರ ಓಕುಳಿ ಹಾಗೂ ಅವಭೃತ ಸ್ನಾನ, ಶುಕ್ರವಾರ ಅಶ್ವರೋಹಣೋತ್ಸವ, ಮಹಾಪೂರ್ಣಾಹುತಿ, ಧ್ವಜವರೋಹಣ, ಪೂರ್ಣಕುಂಭಾಭಿಷೇಕ ಹಾಗೂ ಅಂಕುರ ಪ್ರಸಾದ ವಿತರಣೆ ನಡೆಯಲಿದೆ.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಬಿ.ಎನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಕೆರಾಡಿ, ಸದಸ್ಯರಾದ ಗಣೇಶ್ ಕಿಣಿ ಬೆಳ್ವೆ, ಡಾ.ಅತುಲಕುಮಾರ ಶೆಟ್ಟಿ, ಗೋಪಾಲಕೃಷ್ಣ ನಾಡ, ಜಯಾನಂದ ಹೋಬಳಿದಾರ್, ಸಂಧ್ಯಾ ರಮೇಶ್, ರತ್ನಾ ರಮೇಶ್ ಕುಂದರ್, ಕೆ.ಪಿ.ಶೇಖರ್, ಬ್ರಹ್ಮರಥ ದಾನಿ ಉದ್ಯಮಿ ಸುನೀಲ್ ಶೆಟ್ಟಿ, ವೀರಭದ್ರ ದೇವಸ್ಥಾನದ ನಿರ್ಮಾತೃ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಹಿಂದಿನ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ.ಮಹೇಶ್, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಗೋವಿಂದ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಮಕೃಷ್ಣ ಭಟ್, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ವಂಡಬಳ್ಳಿ ಜಯರಾಮ್ ಶೆಟ್ಟಿ, ಚುಚ್ಚಿ ನಾರಾಯಣ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು ಇದ್ದರು.

Comments

Leave a Reply

Your email address will not be published. Required fields are marked *

More posts

Exit mobile version