ಕುಂದಾಪುರ :ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯಿಂದ 41ಸಾವಿರ ಸಮವಸ್ತ್ರ ವಿತರಣೆ

0
431

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ರಿ., ಬೆಂಗಳೂರು ಇವರು ಉಡುಪಿ ಜಿಲ್ಲೆಯ ೩೨೫ ಸರ್ಕಾರಿ, ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಕೊಡುಗೆಯಾಗಿ ೪೧,೦೦೦ ಜೊತೆ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜುಲೈ ೮ ಶನಿವಾರ ಕುಂದಾಪುರ ಅಂಕದಕಟ್ಟೆಯ ಸಹನಾ ಕನ್ವನ್ಷನ್ ಸೆಂಟರ್‌ನಲ್ಲಿ ನಡೆಯಿತು.

ಮಾಜಿ ಸಚಿವರು ಕಾರ್ಕಳ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಘಾಟನಾ ಮಾತುಗಳನ್ನಾಡಿದ ಸುನಿಲ್ ಕುಮಾರ್ ಅವರು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ವತಿಯಿಂದ ಈ ವರ್ಷವೂ ಉಡುಪಿ ಜಿಲ್ಲೆಯ 41 ಸಾವಿರ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ವಿತರಿಸಲಾಗುತ್ತಿದೆ. ಕಳೆದ ವರ್ಷ 30ಸಾವಿರ ಸಮವಸ್ತ್ರ ವಿತರಿಸಲಾಗಿತ್ತು. ಇಷ್ಟು ದೊಡ್ಡ ಸಂಖ್ಯೆಯ ದೊಡ್ಡ ಮೊತ್ತದ ದಾನ ಮಾಡುವ ಮನಸ್ಥಿತಿ ಹಾಗೂ ಶಕ್ತಿ ಇರುವವರು ಬಹಳ ವಿರಳ. ಹಾಲಾಡಿ ಕುದ್ರುಮನೆ ಶ್ರೀನಿವಾಸ ಶೆಟ್ಟಿಯವರು ಸಮಾಜದ ಎಲ್ಲಾ ಮಜಲುಗಳನ್ನೂ ಅರಿತವರು. ಅವರ ಶಿಕ್ಷಣ, ಸಮಾಜಮುಖಿ ಚಿಂತನೆಗಳು ಮತ್ತು ಪ್ರಕೃತಿಯ ಬಗೆಗಿನ ಕಾಳಜಿ ಈಗಿನ ಯುವ ಸಮುದಾಯಕ್ಕೆ ಬಹಳಷ್ಟು ಪ್ರೇರಕ ಎಂದು ಹೇಳಿದರು.

ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕುಂದಾಪುರ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ, ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲೆ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ, ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೇಕಾರ್ ಅವರಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿಯ ಅಧ್ಯಕ್ಷರಾದ ಹೆಚ್.ಎಸ್.ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಹಾಲಾಡಿ ನಾಗರಾಜ ಶೆಟ್ಟಿ. ಕಾರ್ಯದರ್ಶಿ ಡಾ.ಸುಮನಾ ಶೆಟ್ಟಿ ಅತಿಥಿಗಳನ್ನು ಗೌರವಿಸಿದರು.

ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಕುಮಾರ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರ್ವಹಿಸಿದರು. ಟ್ರಸ್ಟ್ ನ ಕೋಶಾಧಿಕಾರಿ ರಾಜೀವ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here