ಬೈಂದೂರು :ಶಾಲೆಯಲ್ಲಿ ಅವಮಾನ ಸಹಿಸದೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಸಾರ್ವಜನಿಕರಿಂದ ನ್ಯಾಯಕ್ಕಾಗಿ ಆಗ್ರಹ

0
301

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರೇರಣೆ ನೀಡಿದವರನ್ನು ಬಂಧಿಸಬೇಕು ಮತ್ತು ಸೂಕ್ತ ತನಿಖೆ ನಡೆಸಿ ನ್ಯಾಯ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಸಾರ್ವಜನಿಕರು ಮತ್ತು ಕುಟುಂಬಸ್ಥರು ಬೈಂದೂರು ಆರಕ್ಷಕ ಠಾಣೆ ಮುಂದೆ ಆಗ್ರಹಿಸಿದ್ದಾರೆ.

ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಸಂತ್ರಸ್ಥ ವಿದ್ಯಾರ್ಥಿಗೆ ನ್ಯಾಯ ದೊರಕುವವರೆಗೂ ಶವ ಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ನೋವು ವ್ಯಕ್ತ ಪಡಿಸಿದರು. ಬಳಿಕ ಸ್ಥಳಕ್ಕಾಗಮಿಸಿದ ಕುಂದಾಪುರ ಡಿ.ವೈ .ಎಸ್.ಪಿ ಬೆಳ್ಳಿಯಪ್ಪ, ಪ್ರೋಬೇಷನರಿ ಐಪಿಎಸ್ ಡಾ. ಹರ್ಷ ಪ್ರಿಯಂವದಾ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್‌ ಸಾರ್ವಜನಿಕರ ಜೊತೆ ಮಾತನಾಡಿ, ಈಗಾಗಲೇ ವಿಚಾರದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ವಿದ್ಯಾರ್ಥಿ ಆತ್ಮಹತ್ಯೆಯಾಗಿರುವ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಒಂದು ವಾರದೊಳಗೆ ತನಿಖೆ ನಡೆಸಿ ಸೂಕ್ತ ವರದಿ ನೀಡಲಾಗುವುದು. ತಪ್ಪಿತಸ್ಥರ ಬಗ್ಗೆ ಸ್ಪಷ್ಟತೆ ಸಿಕ್ಕಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ ಊರ ಹಿರಿಯರು, ಸಮಾಜದ ಮುಖಂಡರು, ಸ್ಥಳೀಯರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಬಳಿಕ ನುತಿನ್ ಮೃತದೇಹವನ್ನು ಮನೆಗೆ ಕಳುಹಿಸಿಕೊಡಲಾಯಿತು.

LEAVE A REPLY

Please enter your comment!
Please enter your name here