ಕಟ್ ಬೇಲ್ತೂರು :ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನಾ ಸಪ್ತಾಹಕ್ಕೆ ಚಾಲನೆ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಬಿಜೆಪಿಯವರು ಸರಕಾರದ ವಿರುದ್ಧ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಸರಕಾರದ ಅವಧಿಯಲ್ಲಿ ಗ್ರಾಮ ಪಂಚಾಯತ್‍ಗೆ ಇದ್ದ 9/11 ಹಕ್ಕನ್ನು ಮೊಟಕುಗೊಳಿಸಿ ನಗರಾಭಿವೃದ್ಧಿ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ. ಹೀಗಾಗಿ ವರ್ಷಗಟ್ಟಲೆ ಮನೆ ಕಟ್ಟುವರರು ಕಚೇರಿಗೆ ಅಲೆಯುತ್ತಿದ್ದಾರೆ. ಅಕ್ರಮ ಸಕ್ರಮ ಕಾನೂನು ತಿದ್ದುಪಡಿ ಮಾಡಿ ಸಮಿತಿಗೆ ಇದ್ದ ಹಕ್ಕನ್ನು ಮೊಟಕುಗೊಳಿಸಿ ಕುಮ್ಕಿ ಅರ್ಜಿಯನ್ನು ತಿರಸ್ಕಾರ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅಕ್ರಮ ಸಕ್ರಮದಲ್ಲಿ 30 ಸಾವಿರ ಅರ್ಜಿ ಇತ್ಯರ್ಥಕ್ಕೆ ಬಾಕಿ ಇದೆ. ಆದರೆ ಶಾಸಕರಾದವರು ಹೆಚ್ಚುವರಿ ಕಮಿಟಿ ಮಾಡಿದ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಟ್‍ಬೇಲ್ತೂರಿನಲ್ಲಿ ನಡೆದ ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಉದ್ಯೋಗ ಖಾತರಿ ಯೋಜನೆಯಡಿ ಹಣ ಬಿಡುಗಡೆಯಾಗುತ್ತಿಲ್ಲ. ರಾಷ್ಟ್ರದಲ್ಲಿ ಜಿಎಸ್‍ಟಿ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕ ಇದ್ದರೂ ಕರ್ನಾಟಕದ ಪಾಲನ್ನು ನೀಡದೆ, ಬೇರೆ ರಾಜ್ಯಗಳಿಗೆ ನೀಡುತ್ತಿದ್ದಾರೆ. ಆದ್ದರಿಂದ ಕರ್ನಾಟಕದ ಜಿಎಸ್‍ಟಿ ಪಾಲನ್ನು ರಾಜ್ಯಕ್ಕೆ ನೀಡಬೇಕು ಎಂದು ಒತ್ತಾಯಿಸಿ ಅವರು ಸಂಜೀವಿನಿ ಸಂಘದ ಸಭೆಯನ್ನು ಪಾರ್ಟಿ ಕಚೇರಿಯಲ್ಲಿ ಮಾಡುವುದಕ್ಕೆ ವಿರೋಧವಿದೆ. ಇದರ ಬಗ್ಗೆ ಆಂದೋಲನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

94ಸಿ ಅಡಿ 140 ಜನರಿಗೆ ಹಕ್ಕು ಪತ್ರ ನೀಡಲಾಗಿದೆ. ಮುಂದಿನ ಎರಡು ತಿಂಗಳೊಳಗೆ 500 ಜನರಿಗೆ ಹಕ್ಕುಪತ್ರ ನೀಡಲು ಸೂಚನೆ ನೀಡಲಾಗಿದೆ. ಐದು ಗ್ಯಾರಂಟಿ ಸುಳ್ಳು ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿಯವರಿಗೆ ಐದು ಗ್ಯಾರಂಟಿ ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ತಕ್ಕ ಉತ್ತರ ನೀಡಿದೆ. ರಾಜ್ಯದ ಅನುದಾನದಲ್ಲಿ ಕೈಗೊಂಡ ಕಾಮಗಾರಿಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಫೋಟೋ ಹಾಕಬೇಕು. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗುವುದು. ಸರಕಾರದ ಯೋಜನೆ ಹಾಗೂ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಎಂದು ಅವರು ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್, ಕಟ್‍ಬೇಲ್ತೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಂದ್ರ ನಾಯ್ಕ್ ಹೆಮ್ಮಾಡಿ, ಕಾಂಗ್ರೆಸ್ ಮುಖಂಡ ಶೇಖರ ಬಳೆಗಾರ್, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಕುಮಾರ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Comments

Leave a Reply

Your email address will not be published. Required fields are marked *

More posts

Exit mobile version