ಪರಿಸರ ಕಾಳಜಿ ಇಂದಿನ ಅಗತ್ಯ – ವಲಯ ಅರಣ್ಯಾಧಿಕಾರಿ ಸಂದೇಶ್ ಕಿವಿಮಾತು

0
146

ಸುಮುಖ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಪರಿಸರ ದಿನಾಚರಣೆ – ವಿದ್ಯಾರ್ಥಿಗಳಿಗೆ ನಗದು ಬಹುಮಾನ

ಕುಂದಾಪುರ ಮಿರರ್ ಸುದ್ದಿ…
ಸಿದ್ಧಾಪುರ: ಪ್ರಸಕ್ತ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಜೊತೆಗೆ ಪರಿಸರ ಬೆಳೆಸುವ ಶಿಕ್ಷಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಶಿಕ್ಷಣ ಇಲಾಖೆಗಳೊಂದಿಗೆ ಕೈಜೋಡಿಸಿ ಪರಿಸರ ದಿನಾಚರಣೆ ಆಚರಿಸುತ್ತಿದೆ. ದೇಶದಲ್ಲಿ ಶೇ15ರಷ್ಟು ಕಾಡು ಬೆಳೆಸುವ ಗುರಿ ಹೊಂದಲಾಗಿದ್ದು ಮಕ್ಕಳು ಮತ್ತು ಯುವ ಜನತೆ ಪರಿಸರ ಬೆಳೆಸಿ ಉಳಿಸುವ ಬಗ್ಗೆ ಕಾರ್ಯಪ್ರವೃತ್ತರಾಗಬೇಕು ಎಂದು ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಸಂದೇಶ್ ಹೇಳಿದರು. ಅವರು ಶುಕ್ರವಾರ ಸಿದ್ಧಾಪುರದ ಸುಮುಖ ಎಜ್ಯುಕೇಷನಲ್ ಟ್ರಸ್ಟ್ ಪ್ರವರ್ತಿತ ಸುಮುಖ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಸಂಸ್ಥೆ ಯು ಸಿದ್ಧಾಪುರದ ಸರಸ್ವತಿ ವಿದ್ಯಾಲಯ ಮತ್ತು ಜ್ಞಾನಸರಸ್ವತಿ ಪಿಯು ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡಗಳಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸುಮುಖ ಎಜ್ಯುಕೇಷನಲ್ ಟ್ರಸ್ಟ್ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟೀ ಬಿ.ಎಸ್.ಸುರೇಶ್ ಶೆಟ್ಟಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪರಿಸರ ಕಾಳಜಿಯನ್ನು ರೂಢಿಸಿಕೊಳ್ಳಬೇಕು. ಭವಿಷ್ಯದಲ್ಲಿ ಮನುಕುಲದ ಉಳಿವಿಗೆ ಅರಣ್ಯ ಪರಿಸರದ ಉಳಿವು ಅತ್ಯಗತ್ಯವಾಗಿದೆ ಎಂದರು.

ವೇದಿಕೆಯಲ್ಲಿ ಸಿದ್ಧಾಪುರ ಗ್ರಾಮ ವಿಕಾಸ ಸಮಿತಿಯ ಶ್ರೀಕಾಂತ ನಾಯಕ್, ಶ್ರೀ ಲಕ್ಷ್ಮೀ ಧನ್ವಂತರಿ ಚಿಕಿತ್ಸಾಲಯದ ಡಾ. ಚೈತ್ರಾ ರಂಜಿತ್ ಶೆಟ್ಟಿ, ಸುಮುಖ ಎಜ್ಯುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಯು. ಪಾಂಡುರಂಗ ಪಡಿಯಾರ್, ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಕುಮಾರ್ ಹೆಗ್ಡೆ, ಉಪಪ್ರಾಂಶುಪಾಲ ಹರ್ಷ ಶೆಟ್ಟಿ ಆಜ್ರಿ, ಸರಸ್ವತಿ ವಿದ್ಯಾಲಯದ ಮುಖ್ಯೋಪಾದ್ಯಾಯಿನಿ ಶ್ವೇತಾ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭ ಕಳೆದ ವರ್ಷದ ನೀಡಲಾದ ಗಿಡಗಳನ್ನು ನೆಟ್ಟು ಪೋಷಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಅಲ್ಲದೇ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಗಿಡಗಳನ್ನು ಹಸ್ತಾಂತರಿಸಲಾಯಿತು. ಶಿಕ್ಷಣ ಸಂಸ್ಥೆಯ ಆವರಣದಲ್ಲಿ ರಕ್ತಚಂದನ ಗಿಡಗಳನ್ನು ವಿದ್ಯಾರ್ಥಿಗಳು ಅತಿಥಿಗಳೊಂದಿಗೆ ಸೇರಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.

LEAVE A REPLY

Please enter your comment!
Please enter your name here