ಕುಂದಾಪುರ ಮಿರರ್ ಸುದ್ದಿ…
ಕಿರಿಮಂಜೇಶ್ವರ: ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವೈಭವಯುತವಾಗಿ ಆಚರಿಸಲಾಯಿತು . ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ “ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ಯೋಗವು ಮನುಷ್ಯರು ದೈಹಿಕ ಮತ್ತು ಮಾನಸಿಕ ಸ್ವಸ್ಥತೆಯನ್ನು ಕಾಯ್ದುಕೊಂಡು ಉತ್ತಮ ಆರೋಗ್ಯವನ್ನು ಹೊಂದಲು ಅತ್ಯಂತ ಅವಶ್ಯಕವಾಗಿದೆ. ಹಾಗಾಗಿ ಪ್ರತಿಯೊಬ್ಬರು ಯೋಗದ ಆಸನಗಳನ್ನು ಅಭ್ಯಸಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.
ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಅವರು ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ “ಯೋಗವಿದ್ದಲ್ಲಿ ರೋಗವಿಲ್ಲ. ಆರೋಗ್ಯಪೂರ್ಣ ಬದುಕಿಗೆ ಯೋಗ ಅನಿವಾರ್ಯ ಎಂಬಂತಾಗಿದೆ” ಎಂದರು.
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಮಾತನಾಡಿ ” ಇಂದು ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಗುವಲ್ಲಿ ಯೋಗದ ಪಾತ್ರ ಹೆಚ್ಚಿನದ್ದಾಗಿದೆ. ಪ್ರಪಂಚದಲ್ಲಿರುವ ಬಹುತೇಕ ಜನರು ಉತ್ತಮ ಆರೋಗ್ಯವನ್ನು ಹೊಂದಲು ಯೋಗಾಭ್ಯಾಸವನ್ನು ತಮ್ಮ ಬದುಕಿನ ಭಾಗವನ್ನಾಗಿಸಿಕೊಂಡಿದ್ದಾರೆ. ನಮ್ಮ ಸಂಸ್ಥೆಯಲ್ಲಿಯೂ ಕೂಡ ನುರಿತ ಯೋಗ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣವನ್ನು ನೀಡುವುದರೊಂದಿಗೆ ಅವರನ್ನು ಸದೃಢರನ್ನಗಿಸುವ ಸಂಕಲ್ಪ ಹೊಂದಿದ್ದೇವೆ ” ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಯೋಗ ವಿದ್ಯಾರ್ಥಿಗಳು ಯೋಗದ ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಶಾಲಾ ಸಂಯೋಜಕರಾಗಿರುವ ಸುಬ್ರಮಣ್ಯ ಮರಾಟಿ, ಶಿಕ್ಷಕ/ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕಿಯಾಗಿರುವ ಮಲ್ಲಿಕಾ ವಂದಿಸಿದರು. ದೈಹಿಕ ಶಿಕ್ಷಕರಾಗಿರುವ ಮಂಜುನಾಥ ದೇವಾಡಿಗ ಸ್ವಾಗತಿಸಿ,ಯೋಗ ಶಿಕ್ಷಕಿಯಾಗಿರುವ ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.
