ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಮಾದಕ ವಸ್ತುಗಳ ಸೇವನೆಯಿಂದ ಇಂದು ಕೆಲವು ವಿದ್ಯಾರ್ಥಿಗಳು ದಾರಿ ತಪ್ಪುತಿದ್ದು, ಅದರಿಂದ ಹೊರಬರಲಾರದೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಮಾದಕ ವಸ್ತುಗಳ ಸೇವನೆಯ ದುಶ್ಚಟದಿಂದ ದೂರವಿರಿ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಹಿರಿಯ ಆರಕ್ಷಕರಾದ ಮಧುಸೂದನ್ ಅವರು ಮಕ್ಕಳಿಗೆ ಕಿವಿ ಮಾತು ಹೇಳಿದರು.
ಅವರು ಇಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಂಕರನಾರಾಯಣದಲ್ಲಿ ಸಂಭ್ರಮ ಶನಿವಾರದ ಪ್ರಯುಕ್ತ ನಡೆದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀನಿವಾಸ ನಾಯ್ಕ್ ವಹಿಸಿಕೊಂಡಿದ್ದರು.
ಈ ಸಭೆಯ ಮುಖ್ಯ ಅತಿಥಿಯಾದ ಶಂಕರನಾರಾಯಣ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಸದಾಶಿವ ಶೆಟ್ಟಿ ಅವರು ವಿದ್ಯಾರ್ಥಿಗಳು ಎಳವೆಯಿಂದಲೇ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಿರಬೇಕು ಮತ್ತು ಆದರಿಂದ ದೂರವಿರಬೇಕು ಎಂದು ತಿಳಿಸಿದರು.
ಸಭಾ ವೇದಿಕೆಯಲ್ಲಿ ಅತಿಥಿಗಳಾಗಿ ಶಂಕರ ನಾರಾಯಣ ಪೊಲೀಸ್ ಠಾಣೆಯ ಆರಕ್ಷಕರಾದ ಪುನೀತ್ ಶೆಟ್ಟಿ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಸೌಮ್ಯ, ಶಾಲೆಯ ಹಿರಿಯ ಮುಖ್ಯ ಶಿಕ್ಷಕರಾದ ಶಂಕರ್ ಎಸ್. ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಶಂಕರ್ ಎಸ್ ಸ್ವಾಗತಿಸಿದರು. ಸಹ ಶಿಕ್ಷಕರಾದ ಗಣೇಶ್ ಶೆಟ್ಟಿ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ರಾಜಶ್ರೀ ವಂದಿಸಿದರು. ಶಾಲೆಯ ಶಿಕ್ಷಕ ವೃಂದ ಸಹಕರಿಸಿದರು.ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
