ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಹೋಬಳಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಸದೆ ರೈತರನ್ನು ಸಂಕಷ್ಟಕ್ಕೆ ದೂಡಿರುವುದನ್ನು ಕುಂದಾಪುರ ತಾಲೂಕು ರೈತಸಂಘ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರೈತಸಂಘದ ಮುಖಂಡ ಬಲಾಡಿ ಸಂತೋಷ್ ಶೆಟ್ಟಿ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬೈಂದೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ರಮ-ಸಕ್ರಮ ಸಮಿತಿಗಳನ್ನು ರಚಿಸಿದ್ದರೂ, ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆಯವರ ಸ್ವಪ್ರತಿಷ್ಠೆಯ ಧೋರಣೆಯಿಂದ ವಂಡ್ಸೆ ಹೋಬಳಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಸದಿರುವುದು ರೈತರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡಿದೆ ಎಂದು ಆರೋಪಿಸಿದ್ದಾರೆ.
ಅಕ್ರಮ-ಸಕ್ರಮ ಯೋಜನೆಯಡಿ ಫಾರ್ಮ್ 50, 53 ಹಾಗೂ 57ರಡಿ ಅರ್ಜಿ ಸಲ್ಲಿಸಿರುವ ರೈತರ ಅನೇಕ ಕಡತಗಳು ಇನ್ನೂ ವಿಲೇವಾರಿಯಾಗದೆ ಬಾಕಿ ಉಳಿದಿವೆ. ತಾತ್ಕಾಲಿಕ ಮತ್ತು ಖಾಯಂ ಮಂಜೂರಾತಿಗೆ ಸಂಬಂಧಿಸಿದ ಪ್ರಕರಣಗಳು, ಹಣ ಪಾವತಿಯಾಗಿರುವ ಕಡತಗಳು ಸೇರಿದಂತೆ ಹಲವಾರು ಅರ್ಜಿಗಳು ಅಧಿಕಾರಿಗಳ ಕಚೇರಿಗಳಲ್ಲೇ ಬಾಕಿಯಾಗಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಮಧ್ಯಪ್ರವೇಶಿಸಿ ವಂಡ್ಸೆ ಹೋಬಳಿಯ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಸಿ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಲ್ಲವಾದಲ್ಲಿ ಇಡೀ ರೈತ ಸಮುದಾಯವನ್ನು ಸಂಘಟಿಸಿ ಕುಂದಾಪುರ ತಾಲೂಕು ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿರುವ ಬಲಾಡಿ ಸಂತೋಷ್ ಶೆಟ್ಟಿ, ರೈತರಿಗೆ ನ್ಯಾಯ ದೊರೆಯುವವರೆಗೆ ಕುಂದಾಪುರ ತಾಲೂಕು ರೈತಸಂಘ ತನ್ನ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಿದೆ. ರೈತರ ಹಕ್ಕುಗಳ ರಕ್ಷಣೆಗಾಗಿ ಹಾಗೂ ಬಾಕಿ ಇರುವ ಅಕ್ರಮ-ಸಕ್ರಮ ಅರ್ಜಿಗಳ ವಿಲೇವಾರಿಗೆ ಅಗತ್ಯವಿರುವ ಎಲ್ಲಾ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸಂಘ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
