ಪತ್ರಕರ್ತನಿಗೆ ಹಲ್ಲೆ ಪ್ರಕರಣ -ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು

0
37

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರಿಗೆ ಇಲ್ಲಿನ ಹೋಟೆಲಿನಲ್ಲಿ ಶುಕ್ರವಾರ ಬೆಳಗ್ಗೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಕೊಲೆ‌ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಡಾ. ಮಹೇಂದ್ರ ‌ಕುಮಾರ್ ಶೆಟ್ಟಿಯನ್ನು ತಕ್ಷಣದಿಂದ ಸರಕಾರಿ ಸೇವೆಯಿಂದ‌ ಅಮಾನತುಗೊಳಿಸಿ ರಾಜ್ಯ ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಹಾಗೂ ಶಿಸ್ತು ‌ಪ್ರಾಧಿಕಾರಿ ಗುರುದತ್ ಹೆಗಡೆ ಆದೇಶಿಸಿದ್ದಾರೆ.
ಇವರು ಹಿಂದೆ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದು, ಪ್ರಸ್ತುತ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನ್ಯಪರ ಸೇವೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಆ.4 ರಿಂದ ಸೆ.30ರವರೆಗೆ ಒಟ್ಟು 58 ದಿನಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ರಜೆಯಲ್ಲಿದ್ದು, ಈ ಅವಧಿಯಲ್ಲಿ ಆ.21ರಂದು ಕುಂದಾಪುರದ ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಅವರು ಹೊಟೇಲ್‌ನಲ್ಲಿ ಇದ್ದ ಸಂದರ್ಭ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಾಹಿತಿ ನೀಡಿದ್ದರು. ವೈದ್ಯರು ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಆದ್ದರಿಂದ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ, ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರ ವಿರುದ್ಧದ ಕರ್ತವ್ಯಲೋಪ ಮತ್ತು ಬೇಜವಾಬ್ದಾರಿತನದ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೆಲವೇ ಗಂಟೆಗಳಲ್ಲಿ ಅಮಾನತು ಆದೇಶ ; ಮೆಚ್ಚುಗೆ
ಸರಕಾರಿ ವೈದ್ಯರೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯಾಗಿ ಅನುಚಿತವಾಗಿ ವರ್ತಿಸಿದಂತಹ ಘಟನೆ ನಡೆದ ಕೆಲವೇ ‌ಗಂಟೆಗಳಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಗ್ಯ ಇಲಾಖೆಯು ಈ ಅಮಾನತು ಆದೇಶವನ್ನು ಕೈಗೊಂಡಿದ್ದು, ಆರೋಗ್ಯ ಸಚಿವ ಯು.ಟಿ.‌ ಖಾದರ್ ಹಾಗೂ ಇಲಾಖೆಯ ಉನ್ನತಾಧಿಕಾರಿಗಳ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ‌ ಪ್ರಶಂಸೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here