ಕುಂದಾಪುರ ಮಿರರ್ ಸುದ್ದಿ…
ಬೆಂಗಳೂರು :ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಹಕ್ಕಿನ ಸಮಸ್ಯೆಗೆ ಅಂತಿಮ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ (KAHSS) ರಾಜ್ಯ ಸಂಘಟನಾ ಸಮಿತಿಯ ನಿಯೋಗವು ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ಅರಣ್ಯ, ಪರಿಸರ ಮತ್ತು ಪರಿಸರಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿತು.
ಆಲೂರು ಹಾಗೂ ಹರ್ಕೂರು ಗ್ರಾಮದ ಡಿಸಿ ಮನ್ನಾ ಭೂಮಿಯನ್ನು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಈಕ್ವಿಟಿ/ಗುತ್ತಿಗೆ ನವೀಕರಣದಿಂದ ಕೈಬಿಟ್ಟು, ಕೊರಗ ಕುಟುಂಬಗಳಿಗೆ ಭೂಮಿ ಒದಗಿಸುವಂತೆ ನಿಯೋಗವು ಮನವಿ ಮಾಡಿತು.
ಈ ಕುರಿತು ಸಚಿವ ರಾಮಲಿಂಗಾರೆಡ್ಡಿಯವರು ಸಕಾರಾತ್ಮಕವಾಗಿ ಸ್ಪಂದಿಸಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಈಕ್ವಿಟಿ/ಗುತ್ತಿಗೆ ನವೀಕರಣ ಸಂದರ್ಭದಲ್ಲಿ ಆಲೂರು ಮತ್ತು ಹರ್ಕೂರು ಗ್ರಾಮದ ಡಿಸಿ ಮನ್ನಾ ಭೂಮಿಯನ್ನು ಕೈಬಿಡುವ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜಿಲ್ಲಾಡಳಿತದಿಂದ ಅಗತ್ಯ ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಬಂದ ಕೂಡಲೇ ಈ ಪ್ರಕರಣದಲ್ಲಿ ಕ್ರಮ ವಹಿಸುವುದಾಗಿ ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ, ಕೊರಗ, ಹಸ್ಲರ್, ಹಸಲ, ಕುಣುಬಿ, ಹಾಲಕ್ಕಿ ಸೇರಿದಂತೆ ಅರಣ್ಯ ಆಧಾರಿತ ಬುಡಕಟ್ಟು ಸಮುದಾಯಗಳ ವಿವಿಧ ಸಮಸ್ಯೆಗಳ ಇತ್ಯರ್ಥಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ಅರಣ್ಯ ಆಧಾರಿತ ಬುಡಕಟ್ಟು ಸಮುದಾಯಗಳ ಅರಣ್ಯ ಹಕ್ಕು ಮತ್ತು ಅರಣ್ಯ ಸಂಪನ್ಮೂಲಗಳ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದರು.
ಅದೇ ರೀತಿ ಕಸ್ತೂರಿರಂಗನ್ ವರದಿ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಜನರ ಹಕ್ಕುಗಳು ಮತ್ತು ಬದುಕಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಜನಪರವಾದ ನಿರ್ಧಾರವನ್ನು ಅಧಿವೇಶನದಲ್ಲಿ ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿಯವರು ತಿಳಿಸಿದರು.
ನಿಯೋಗದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಂಘಟನಾ ಸಮಿತಿ ಸಹ-ಸಂಚಾಲಕ ಶ್ರೀಧರ ನಾಡ, ಡಾ. ಎಸ್.ವೈ. ಗುರುಶಾಂತ್, ಉತ್ತರ ಕನ್ನಡ ಜಿಲ್ಲೆಯ ಕಾರ್ಮಿಕ ಸಂಘಟನೆಯ ಮುಖಂಡರಾದ ಯಮುನಾ ಗಾವಂಕರ್, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಟಿ. ಯಶವಂತ್, ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್, ಸಿಪಿಎಂ ರಾಜ್ಯ ಸಮಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
