ಕುಂದಾಪುರ ಮಿರರ್ ಸುದ್ದಿ…
ಬೈಂದೂರು :ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ ಅಡಿಯಲ್ಲಿ (CRIF) ಒಟ್ಟು 68 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಮಂಜೂರಾತಿ ನೀಡಲಾಗಿದೆ ಎಂದು ಸಂಸದರಾದ ಬಿ.ವ್ಯ ರಾಘವೇಂದ್ರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 13 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 84.78 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಯನ್ನು ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ ಮತ್ತು ಬೈಂದೂರು ತಾಲ್ಲೂಕುಗಳಲ್ಲಿಯೂ ನಿಗದಿತ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಮರು ಡಾಂಬರೀಕರಣ ಮಾಡಲಾಗುವುದೆಂದು ಸಂಸದರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನುದಾನವನ್ನು ಮಂಜೂರು ಮಾಡಿದೆ. ಈ ಪ್ರಮುಖ ರಸ್ತೆಗಳ ಸುಧಾರಣೆಗೆ ಕಾಮಗಾರಿ ಪೂರ್ಣಗೊಂಡ ಬಳಿಗೆ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಮತ್ತರು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ವಿವರಿಸಿದ್ದಾರೆ.
ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ ಅಡಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ರಾಜ್ಯ ಮತ್ತು ಜಿಲ್ಲಾ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಬಲವರ್ಧನೆ ಮತ್ತು ಡಾಂಬರೀಕರಣಕ್ಕೆ ಅನುದಾನ ಒದಗಿಸಿದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜೀಯವರಿಗೆ ಹಾಗೂ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದ ಬಿ.ವೈ ರಾಘವೇಂದ್ರರವರು ಹೃತೂರ್ವಕ ಅಭಿಂದನೆಗಳನ್ನು ಸಲ್ಲಿಸಿದ್ದಾರೆ.












