ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ(ಎಸ್ಡಿಎಂಸಿ) ಸಮನ್ವಯ ವೇದಿಕೆ, ಉಡುಪಿ ಜಿಲ್ಲೆ ಕೊಡಮಾಡುವ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಸೆ.10ರಂದು ಕೊಟೇಶ್ವರದ ಸರಸ್ವತೀ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ತಾಲೂಕು ಕಾನೂನು ಸೇವಾ ಸಮಿತಿ ಸಹಭಾಗಿತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ನ್ಯಾಯಾಧೀಶರು ಭಾಗವಹಿಸಿ ಪ್ರಶಸ್ತಿ ಪ್ರಧಾನಿಸಲಿದ್ದಾರೆ. ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನ ಆರಾಧ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಸಮನ್ವಯ ವೇದಿಕೆ ಪದಾಧಿಕಾರಿಗಳು, ಶಿಕ್ಷಣಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಶೂನ್ಯ ಶಿಕ್ಷಕರಿರುವ ಶಾಲೆಗಳಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಶಿಕ್ಷಣ ಇಲಾಖೆಯ ಸಿಆರ್ಪಿಯವರನ್ನು ಗುರುತಿಸಿ ಉತ್ತಮ ಸಿಆರ್ಪಿ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ನಿವೃತ್ತರಾದರೂ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಶಿಕ್ಷಕ ನಡೂರು ವಿಶ್ವನಾಥ ಶೆಟ್ಟಿಯವರಿಗೆ ಗುರುವಂದನೆ ಸಲ್ಲಿಸಲಾಗುವುದು. ಅಲ್ಲದೆ ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿ ಸಾಧಕ ಪ್ರಶಸ್ತಿಯನ್ನು ಅಮಾಸೆಬೈಲು ಪರಿಸರದ ಶಾಲೆಗಳ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿರುವ ಶಂಕರ ಐತಾಳ ಅಮಾಸೆಬೈಲು ಇವರಿಗೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











