ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಲು ಅಗತ್ಯ ಕ್ರಮವಹಿಸಿ : ಸಿ.ಇ.ಓ ಪ್ರತೀಕ್ ಬಾಯಲ್

0
286

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ : ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ಹೋಗಿ ಮತ ಚಲಾಯಿಸಲು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನದಲ್ಲಿ ಭಾಗವಹಿಸಿ, ಮತದಾನ ಮಾಡಲು ಉತ್ತೇಜಿಸುವ ಸಲುವಾಗಿ ವಿವಿಧ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯಲಿದೆ. ಮತದಾರರು ಅಂದು ಮತದಾನ ಕೇಂದ್ರಗಳಿಗೆ ತೆರಳಿ ಯಾವುದೇ ಆಸೆ – ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಜಾಗೃತಿ ಮೂಡಿಸುವುದು ಸ್ವೀಪ್ ಸಮಿತಿಯ ಮುಖ್ಯ ಧ್ಯೇಯವಾಗಿದೆ. ಪ್ರತಿಯೊಬ್ಬ ಅಧಿಕಾರಿಗಳು ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.

Click Here

ವಿವಿಧೆಡೆಯಿಂದ ಕೆಲಸ ಅರಸಿ ಜಿಲ್ಲೆಗೆ ವಲಸೆ ಬಂದಿರುವ ಕೂಲಿ ಕಾರ್ಮಿಕರುಗಳ ಮನವೊಲಿಸಿ, ಅವರುಗಳ ಕ್ಷೇತ್ರ ವ್ಯಾಪ್ತಿಯಲ್ಲಿಯೇ ಕಡ್ಡಾಯವಾಗಿ ಮತದಾನದ ದಿನದಂದು ಮತ ಚಲಾಯಿಸಲು ಅವರುಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಮತದಾನ ಕೇಂದ್ರಗಳಿಗೆ ಮತದಾನಕ್ಕೆ ಬಂದಾಗ ಅವರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ವಿಶೇಷ ಗಮನ ಹರಿಸಬೇಕು ಎಂದ ಅವರು, ಬಿ.ಎಲ್.ಓ ಗಳು ಪ್ರತಿಯೊಬ್ಬ ಮತದಾರರಿಗೂ ಮತದಾನ ಮಾಡಲು ಅನುಕೂಲವಾಗುವ ರೀತಿಯಲ್ಲಿ ಮತದಾನ ಕ್ರಮ ಸಂಖ್ಯೆಯ ಚೀಟಿಯನ್ನು ಮನೆಮನೆಗೂ ವಿತರಿಸಬೇಕು ಜೊತೆಗೆ ಮತದಾನ ಯಂತ್ರದ ಬಳಕೆಯ ಬಗ್ಗೆಯೂ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಸ್ಥಳಗಳನ್ನು ಸಮೀಕ್ಷೆ ಮಾಡಿ, ಕಡಿಮೆ ಮತದಾನ ಆಗಿರುವ ಕಾರಣ ಗುರುತಿಸುವುದರೊಂದಿಗೆ, ಮತದಾನ ಪ್ರಮಾಣ ಹೆಚ್ಚಿಸಲು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಮತ ಚಲಾಯಿಸುವವರ ಸಂಖ್ಯೆ ಹೆಚ್ಚಿಸಲು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿ.ಪಂ. ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಯೋಜನಾ ನಿರ್ದೇಶಕ ಕರೀಂ ಆಸಾದಿ, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here