ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಗುಣವಾಗಿ ರಸ್ತೆ ಅಭಿವೃದ್ಧಿ ಕಾರ್ಯಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

0
125

Click Here

Click Here

ಕುಂದಾಪುರ ಮಿರರ್ ಸುದ್ದಿ…


ಉಡುಪಿ: ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಇಳಿಕೆಯಾಗುವಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ, ಸಾಸ್ತಾನ ಹಾಗೂ ಶಿರೂರಿನ ಟೋಲ್‌ಗಳ ಸಮೀಪ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಐದಾರು ಬಾರಿಗೂ ಹೆಚ್ಚು ಟೋಲ್‌ನಲ್ಲಿ ಹಾದುಹೋಗುವಾಗ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು ಅನಾನುಕೂಲತೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆ, ಸ್ಥಳೀಯ ವ್ಯಾಪ್ತಿಯಲ್ಲಿ ವಾಸಿಸುವ ಸಾರ್ವಜನಿಕರಿಗೆ ಈ ಹಿಂದೆ ನೀಡುತ್ತಿದ್ದ ರೀತಿಯಲ್ಲಿಯೇ ಅವರುಗಳ ವಾಹನಗಳಿಗೆ ವಿನಾಯಿತಿ ಕಲ್ಪಿಸಬೇಕು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವುದು ಕೇಳಿಬರುತ್ತಿವೆ. ಇವುಗಳಿಗೆ ಕಾರಣ ರಸ್ತೆಯಲ್ಲಿನ ಅವೈಜ್ಞಾನಿಕ ಕೆಲಸ ಕಾರ್ಯಗಳು ಸೇರಿದಂತೆ ಮತ್ತಿತರ ಸಮಸ್ಯೆಗಳಿಂದ ಉಂಟಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಅಗತ್ಯವಿರುವ ಕಡೆ ಸರ್ವೀಸ್ ರಸ್ತೆ, ರಸ್ತೆ ರಿಫ್ಲೆಕ್ಟರ್‌ಗಳ ಅಳವಡಿಕೆ, ದಾರಿದೀಪ ಅಳವಡಿಕೆ, ರಸ್ತೆಯಲ್ಲಿ ಹೊಂಡ ದುರಸ್ಥಿ, ಜಂಕ್ಷನ್‌ಗಳಲ್ಲಿ ಸರಿಯಾದ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದು ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

Click Here

ಕೆಲವು ಟೋಲ್ ಸಮೀಪದಲ್ಲಿ ಹೋಟೆಲ್‌ಗಳು ಮತ್ತು ಅಂಗಡಿಗಳು ಇರುವುದರಿಂದ ವಾಹನಗಳು ರಸ್ತೆಯಲ್ಲಿ ಪಾರ್ಕ್ ಮಾಡಿದ ಸಂದರ್ಭದಲ್ಲಿ ಅಪಘಾತಗಳು ಉಂಟಾಗುವ ಸಾಧ್ಯತೆ ಇವೆ. ಇವುಗಳ ತೆರವಿಗೆ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ಟೋಲ್ ಸಮೀಪದಲ್ಲಿ ಹೆಣ್ಣು ಮಕ್ಕಳ ವಿಶ್ರಾಂತಿ ಕೊಠಡಿ, ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಹಾಗೂ ಜಂಕ್ಷನ್‌ಗಳಲ್ಲಿ ಸಿ.ಸಿ.ಟಿವಿ ಆಳವಡಿಸುವಂತೆ ತಿಳಿಸಿದರು.

ಈಗಾಗಲೇ ರಾಷ್ಟ್ರೀಯ ಹೆದ್ದಾರಿಯ ಕೆಲವು ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲು ಅನುಮತಿ ದೊರಕಿದ್ದು, ಇವುಗಳ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು. ಅವಶ್ಯವಿರುವ ಇತರೆ ಸ್ಥಳಗಳಲ್ಲಿ ಸರ್ವೀಸ್ ರಸ್ತೆ ಹಾಗೂ ಮೇಲ್ಸೆತುವೆ ನಿರ್ಮಾಣಕ್ಕೆ ಅನುಮತಿ ಪಡೆದು ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ರಾಷ್ಟ್ರೀಯ ಹೆದ್ದಾರಿಯ ಅಭಿಯಂತರರಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಾತನಾಡಿ, ಜಿಲ್ಲೆಯಲ್ಲಿ ದಿನೇದಿನೇ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಕೆಲವು ಅಪಘಾತದಲ್ಲಿ ಸಾಮಾನ್ಯ ಗಾಯ, ತೀವ್ರತರದ ಗಾಯಗಳಾಗುತ್ತಿದ್ದು, 250 ಕ್ಕೂ ಹೆಚ್ಚು ಮರಣ ಸಂಭವವು ಉಂಟಾಗಿವೆ. ಅವುಗಳಲ್ಲಿ 200 ಮರಣಾಂತಿಕ ಅಪಘಾತಗಳು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಆಗಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಟೋಲ್ ಸಮೀಪದ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಟೋಲ್ ಸಮೀಪದ ಸ್ಥಳೀಯವಾಗಿ ವಾಸವಿರುವ ನಾವುಗಳು ನಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ದಿನಕ್ಕೆ ಎಂಟರಿಂದ ಹತ್ತು ಬಾರಿ ಟೋಲ್ ಅನ್ನು ಪ್ರವೇಶೀಸಿ ಹೋಗುವುದು ಅನಿವಾರ್ಯವಾಗಿದ್ದು, ಪ್ರತೀ ಬಾರಿಯೂ ಶುಲ್ಕ ಪಾವತಿ ಮಾಡುವುದು ಕಷ್ಟಸಾಧ್ಯ. ಇದರಿಂದ ವಿನಾಯಿತಿ ನೀಡಬೇಕು. ಈ ಹಿಂದೆಯೂ ಸಹ ನೀಡಲಾಗುತ್ತಿತ್ತು. ಕೆಲವು ಜಂಕ್ಷನ್‌ಗಳಲ್ಲಿ ಹೆಚ್ಚು ಹೆಚ್ಚು ಅಪಘಾತಗಳು ಉಂಟಾಗಿವೆ, ಮಳೆಯ ನೀರು ಸರಾಗವಾಗಿ ಹರಿದು ಹೋಗದೇ ರಸ್ತೆಯ ಮೇಲೆ ನಿಂತು ಅಪಘಾತಕ್ಕೆ ಆಹ್ವಾನ ಉಂಟು ಮಾಡುತ್ತಿವೆ. ಕೆಲವೊಂದು ವ್ಯಾಪ್ತಿಯಲ್ಲಿ ಸರ್ವೀಸ್ ರೋಡ್ ನಿರ್ಮಾಣ ಮಾಡಬೇಕು. ರಸ್ತೆ ದೀಪ ಅಳವಡಿಕೆ, ಅಪಘಾತವಾದ ಸಂದರ್ಭದಲ್ಲಿ ರಸ್ತೆಯ ಮೇಲಿನ ವಾಹನಗಳನ್ನು ತೆರವುಗೊಳಿಸಲು ಕ್ರೆöÊನ್ ಕಾಯ್ದಿರಿಸುವ ಬಗ್ಗೆ, ಸ್ಥಳೀಯರಿಗೆ ಟೋಲ್‌ನಲ್ಲಿ ಉದ್ಯೋಗ ನೀಡುವ ಬಗ್ಗೆ, ಟೋಲ್‌ನ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸುವ ಬಗ್ಗೆ, ಬ್ರಹ್ಮಾವರದ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಬೇಕು, ಟೋಲ್‌ಗಳ ಬಳಿ ಗುತ್ತಿಗೆ ಅವಧಿಯನ್ನು ಪ್ರದರ್ಶಿಸಬೇಕು ಸೇರಿದಂತೆ ಮತ್ತಿತರ ಅಹವಾಲುಗಳನ್ನು ಸಲ್ಲಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್ ಅಜ್ಮಿ, ಉಡುಪಿ ತಹಶೀಲ್ದಾರ್ ಹರೀಶ್ ಹಾಗೂ ಕಾಪು ತಹಶೀಲ್ದಾರ್ ಪ್ರತಿಭಾ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

Click Here

LEAVE A REPLY

Please enter your comment!
Please enter your name here