ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಕುಂದಾಪುರ ತಾಲೂಕಿನ ತ್ರಾಸಿ – ಮರವಂತೆ ಕಡಲ ತೀರಕ್ಕೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ ಭೇಟಿ ನೀಡಿದರು.
ನದಿ- ಕಡಲ ಸೌಂದರ್ಯಕ್ಕೆ ಮನಸೋತ ಕೇಂದ್ರ ಸಚಿವ ಶೇಖಾವತ್, ಈ ಪರಿಸರ ಎಣಿಸಿದ್ದಕ್ಕಿಂತಲೂ ಅದ್ಭುತವಾಗಿದೆ. ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ ಇರುವುದರಿಂದ ಈ ಭಾಗಕ್ಕೆ ಭೇಟಿ ನೀಡುವಂತೆ ಇಲ್ಲಿನ ಸಂಸದರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ ತಾಣಗಳನ್ನು ವೀಕ್ಷಿಸಲು ಬಂದಿದ್ದು, ನದಿ ಹಾಗೂ ಸಮುದ್ರದ ಸುಂದರವಾದ ವಾತಾವರಣ ಇಲ್ಲಿದೆ. ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಪೂರಕ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ರಾಜ್ಯ ಸರಕಾರದಿಂದ ಪ್ರಸ್ತಾವನೆ ಬಂದ ಬಳಿಕ ಕೇಂದ್ರ ಸರಕಾರ ಹೆಚ್ಚಿನ ಅನುದಾನ ಒದಗಿಸುವ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕೊಲ್ಲೂರು ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಕಳೆದ ಸುಮಾರು ಒಂದು ತಿಂಗಳ ಹಿಂದೆ ಶಾಸಕರು ಹಾಗೂ ಮುಖಂಡರೊಂದಿಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಪ್ರಸ್ತಾವನೆಯನ್ನು ಕೂಡ ಸಲ್ಲಿಸಲಾಗಿತ್ತು. ಕೇಂದ್ರ ಸರಕಾರದ ಸಾಸಿ (ಸ್ಪೆಶಲ್ ಅಸಿಸ್ಟೆಂಟ್ ಫಾರ್ ದ ಸ್ಟೇಟ್ ಫಾರ್ ಕ್ಯಾಪಿಟಲ್ ಡೆವೆಲಪ್ಮೆಂಟ್ ಫರ್ ಇನ್ಫ್ರಾಸ್ಟ್ರಕ್ಚರ್) ಯೋಜನೆಯಡಿ ಪಡುವರಿ-ಸೋಮೇಶ್ವರ, ಮರವಂತೆ ಹಾಗೂ ಕೊಲ್ಲೂರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಅನುದಾನಕ್ಕೆ ಪ್ರಸ್ತಾವನೆ ನೀಡಲಾಗಿತ್ತು. ಸ್ವತ: ಸಚಿವರೇ ಈ ಸ್ಥಳಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿರುವುದರಿಂದ ಈ ಭಾಗಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬರುವ ನಿರೀಕ್ಷೆ ಇಟ್ಟಿಕೊಂಡಿದ್ದೇವೆ ಎಂದರು.
ಸ್ವದೇಶಿ ದರ್ಶನ್ ಯೋಜನೆಯಡಿ ತ್ರಾಸಿ-ಮರವಂತೆಗೆ 112 ಕೋಟಿ, ಪಡುವರಿ-ಸೋಮೇಶ್ವರಕ್ಕೆ 100 ಕೋಟಿ ಹಾಗೂ ಕೊಲ್ಲೂರಿಗೆ 100 ಕೋಟಿ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರಕಾರದಿಂದ ತ್ರಾಸಿ-ಮರವಂತೆ ಮತ್ತು ಪಡುವರಿ-ಸೋಮೇಶ್ವರ ಅಭಿವೃದ್ಧಿ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಹೋಗಿದೆ ಎಂದು ಅವರು ಹೇಳಿದರು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್., ಪ್ರವಾಸೋದ್ಯಮ ಇಲಾಖೆ ಕಮೀಷನರ್ ರಾಜೇಂದ್ರ ಕೆ.ವಿ., ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲಾ ಉಪನಿರ್ದೇಶಕ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬೈಂದೂರು ಮಂಡಲ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಪ್ರಿಯದರ್ಶಿನಿ ದೇವಾಡಿಗ, ಸುರೇಶ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ವೆಂಕಟೇಶ ಕಿಣಿ, ಜಿಲ್ಲಾ ಮತ್ತು ಬೈಂದೂರು ಮಂಡಲದ ಬಿಜೆಪಿ ಮುಖಂಡರು, ವಿವಿಧ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.











