ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ತಮ್ಮ ಸಂಪಾದನೆಯಲ್ಲಿ ಒಂದಿಷ್ಟು ಹಣವನ್ನು ಸಮಾಜಮುಖಿ ದಾನ ಧರ್ಮ ಹಾಗೂ ಸತ್ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಯಾವುದೇ ಪ್ರತಿಫಲಾಕ್ಷೆಯಿಲ್ಲದೆ ವಕ್ವಾಡಿಯ ಆಸರೆ ಟ್ರಸ್ಟ್ ಕಾರ್ಯಚರಿಸುತ್ತಿರುವುದು ಶ್ಲಾಘನೀಯ ವಿಚಾರವಗಿದ್ದು ಈ ಕಾರ್ಯ ಯುವಜನಾಂಗಕ್ಕೆ ಮಾದರಿಯಾಗಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ರವಿವಾರ ವಕ್ವಾಡಿಯ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ವಕ್ವಾಡಿ ಆಸರೆ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅಶಕ್ತರಿಗೆ ಸಹಾಯ ಧನ, ವಕ್ವಾಡಿಯ 3 ಅಂಗನವಾಡಿ ಕೇಂದ್ರಕ್ಕೆ ಮತ್ತು ಹೈಸ್ಕೂಲ್ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆಯ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಸರೆ ಟ್ರಸ್ಟ್ನ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್ ಮನೆ ವಹಿಸಿದ್ದರು. ಕೀರ್ತಿ ಶೆಟ್ಟಿ ವಕ್ವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ರಮೇಶ್ ಶೆಟ್ಟಿ, ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ರೋಟೇರಿಯನ್ ವಿಜಯ್ ಕುಮಾರ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
ಧಾರ್ಮಿಕ ಹಾಗೂ ರಾಜಕೀಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ, ನಾವುಂದ ಹೈಸ್ಕೂಲ್ ಪ್ರಾಧ್ಯಾಪಕ ಬಿ.ಕೆ.ಕೃಷ್ಣಮೂರ್ತಿ, ಕಾಳವಾರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್ ಇದ್ದರು.
ಉದ್ಯಮಿ ಗಜೇಂದ್ರ ಶೆಟ್ಟಿ ಸ್ವಾಗತಿಸಿದರು. ಸತೀಶ್ ಪೂಜಾರಿ ವಕ್ವಾಡಿ ನಿರ್ವಹಿಸಿ, ಆನಂದ್ ಆಚಾರ್ಯ ವಂದಿಸಿದರು. ಸಭೆಯಲ್ಲಿ ಆಸರೆ ಟ್ರಸ್ಟ್ ಸದಸ್ಯರು, ಶಿಕ್ಷಕರು ,ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.











