ಹಟ್ಟಿಯಂಗಡಿ ಗ್ರಾಮ ಪಂಚಾಯತ್ ನ ನೂತನ ಕಟ್ಟಡದ ಉದ್ಘಾಟನೆ
ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಸ್ಥಳೀಯ ನಾಯಕತ್ವ, ಸ್ಥಳೀಯಾಡಳಿತ ಸಮರ್ಥವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ. ರಾಜಕೀಯಕ್ಕಿಂತ ಊರು ಮುಖ್ಯ. ರಾಜಕೀಯ ಮಾಡಲು ಬೇರೆ ವಿಚಾರಗಳಿದೆ, ವೇದಿಕೆಗಳಿವೆ. ರಾಜಕೀಯ ಊರಿಗಿಂತ ದೊಡ್ಡದಲ್ಲ. ಊರಿನ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಜನರ ಪ್ರೀತಿ, ವಿಶ್ವಾಸ ಗಳಿಸುವುದು ಮುಖ್ಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಗ್ರಾಪಂ., ತಾಪಂ., ನರೇಗಾ ಹಾಗೂ ದಾನಿಗಳ ಸಹಕಾರದೊಂದಿಗೆ ಸುಮಾರು 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಗ್ರಾಮ ಪಂಚಾಯತ್ನ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರದಿಂದ ಅನುದಾನ ಬಂದ ಬಳಿಕ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಪಂಚಾಯತ್ ಮೇಲೆ ದಾನಿಗಳು ಹಾಗೂ ಊರಿನವರ ಪ್ರೀತಿ, ಕಾಳಜಿಯಿಂದ ಕಟ್ಟಡ ಸುಸಜ್ಜಿತವಾಗಿ ನಿರ್ಮಾಣಗೊಂಡಿದೆ. ಜನರಿಗೆ ಉತ್ತಮ ಸೇವೆ ನೀಡುವ ಮೂಲಕ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ ಎಂದು ಹಾರೈಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗರತ್ನ ದೇವಾಡಿಗ ಕರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಟ್ಟಅಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಎಚ್.ಬಾಲಚಂದ್ರ ಭಟ್ ಮತ್ತು ಉದ್ಯಮಿ ಕೆ.ಎಂ.ಲಕ್ಷ್ಮಣ ಶುಭ ಹಾರೈಸಿದರು. ಇದೇ ಸಂದರ್ಭ ಕಟ್ಟಡ ನಿರ್ಮಾಣದಲ್ಲಿ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು. ಗ್ರಾಪಂ ಉಪಾಧ್ಯಕ್ಷ ಪ್ರತಾಪ್ ಕುಮಾರ್ ಶೆಟ್ಟಿ, ಉದ್ಯಮಿ ಎಚ್.ಸುಧೀರ ಶೆಟ್ಟಿ ಕೆಂಚನೂರು, ಮಾಜಿ ಅಧ್ಯಕ್ಷರಾದ ಅಮೃತಾ ಪಿ.ಭಂಡಾರಿ ಮತ್ತು ವಿದ್ಯಾಶ್ರೀ, ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಗನಾಥ, ಪಿಡಿಒ ಮಂಜುನಾಥ ಕವಟೇಕರ್, ಸಂತೋಷ ಕುಮಾರ್, ಗ್ರಾಮ ಆಡಳಿತ ಅಧಿಕಾರಿ, ಗ್ರಾಪಂ ಹಾಲಿ ಮತ್ತು ಮಾಜಿ ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾಶ್ರೀ ಸ್ವಾಗತಿಸಿದರು. ಗ್ರಾಪಂ. ಸದಸ್ಯ ಕೆ.ರಾಜೀವ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯೋಗೀಶ್ ಕಾರ್ಯಕ್ರಮ ನಿರ್ವಹಿಸಿದರು.











