ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಗಂಗೊಳ್ಳಿ ಮೀನುಗಾರಿಕೆ ಬಂದರು ಸಮೀಪ ಗುರುವಾರ ನಡೆದಿದೆ.
ಗಂಗೊಳ್ಳಿ ಮೀನುಗಾರಿಕೆ ಬಂದರಿನಿಂದ ಗುರುವಾರ ಬೆಳಿಗ್ಗೆ ಆರು ಜನ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದ ಗುಜ್ಜಾಡಿ ದಯಾಕರ ಮೇಸ್ತ ಮಾಲೀಕತ್ವದ ಜಾಹ್ನವಿ ಹೆಸರಿನ 370 ಬೋಟು ಗಂಗೊಳ್ಳಿ ಬಂದರಿನಿಂದ ಸುಮಾರು 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರದಲ್ಲಿರುವ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಬೋಟ್ ಜಖಂಗೊಂಡು ಸಮುದ್ರದ ನೀರು ಬೋಟ್ ಒಳಗೆ ನುಗ್ಗಿ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ. ಬೋಟಿನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸುತ್ತಮುತ್ತ ಮೀನುಗಾರಿಕೆ ನಡೆಸುತ್ತಿದ್ದ ಇತರ ಬೋಟಿನ ಮೀನುಗಾರರು ರಕ್ಷಿಸಿದ್ದಾರೆ.
ಬೋಟಿನಲ್ಲಿದ್ದ ಬಲೆ, ಇಂಜಿನ್ ಮತ್ತಿತರ ಸಲಕರಣೆಗಳು ಸಮುದ್ರ ಪಾಲಾಗಿದ್ದು, ಬೋಟ್ ಸಂಪೂರ್ಣ ಜಖಂಗೊಂಡಿದೆ. ಬೋಟ್ ದುರ್ಘಟನೆಯಲ್ಲಿ ಅಂದಾಜು 40-45 ಲಕ್ಷ ರೂ. ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.











