ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ, ರಾಜು ದೇವಾಡಿಗ ತ್ರಾಸಿ (66ವರ್ಷ) ಅನಾರೋಗ್ಯ ಕಾರಣದಿಂದ ಫೆ.3ರಂದು ನಿಧನರಾದರು.
ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು, ಉಡುಪಿ ಜಿಲ್ಲೆಯ ಸಕ್ರೀಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದರು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ಗಳನ್ನು ಚುನಾಯಿತ ಪ್ರತಿನಿಧಿಯಾಗಿ ಪ್ರತಿನಿಧಿಸಿದ್ದರು. 2007ರಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಅವರು ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಗಂಗೊಳ್ಳಿಯ ಪಂಚಗಂಗಾವಳಿ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ, ಬೇರೆ ಬೇರೆ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಗುಜ್ಜಾಡಿಯ ಭಾಸ್ಕರ ಪೈ ಸ್ಮಾರಕ ಶಾಲೆಯ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಬೈಂದೂರು ತಾಲೂಕು ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಪಾರ ದೈವಭಕ್ತರಾಗಿದ್ದ ಅವರು, ಅನೇಕ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದರು. ದೇವಾಡಿಗ ಸಮಾಜದ ತ್ರಾಸಿ ವಲಯ ಅಧ್ಯಕ್ಷರಾಗಿದ್ದ ಅವರು, ದೇವಾಡಿಗ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.











