ಕುಂದಾಪುರ ಮಿರರ್ ಸುದ್ದಿ…
ಬೆಂಗಳೂರು: ಮಾಜಿ ಶಾಸಕ ಬಸೂರು ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಾಪ ಸೂಚಿಸಿದ್ದಾರೆ.
91 ವರ್ಷದ ಅಪ್ಪಣ್ಣ ಹೆಗ್ಡೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದರು. ಅವರು 1960 – 83 ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದರು. 1983 -1994ರ ವರೆಗೆ ಶಾಸಕರಾಗಿದ್ದ ಅವರು, ಜನಾನುರಾಗಿ ಎಂದು ಹೆಸರಾಗಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.
ಅಪ್ಪಣ್ಣ ಅವರ ನಿಧನದಿಂದಾಗಿ ಉಡುಪಿ ಜಿಲ್ಲೆಯಲ್ಲಿ ಹಿರಿಯ ರಾಜಕೀಯ ನೇತಾರರೊಬ್ಬರನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಸಾವಿನ ನೋವಿನ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ಆ ದೇವರು ನೀಡಲಿ ಎಂದು ಪ್ರಾರ್ಥಿಸುವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











