ಕುಂದಾಪುರ ಮಿರರ್ ಸುದ್ದಿ…

ಉಡುಪಿ :ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಮತ್ತು ಮುಖ್ಯ ಶಿಕ್ಷಕರ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ವೃದ್ಧಿಗಾಗಿ ನಡೆದ ಜಿಲ್ಲಾ ಮಟ್ಟದ ಮುಖ್ಯ ಶಿಕ್ಷಕರ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಬರುತ್ತಿರುವ ಉಡುಪಿ ಜಿಲ್ಲೆಯು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ ನೂರರಷ್ಟು ಫಲಿತಾಂಶ ಪಡೆದು ತಮ್ಮ ಸಾಧನೆಯನ್ನು ಮುಂದುವರೆಸಿಕೊಂಡು ಹೋಗುವುದರೊಂದಿಗೆ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದರು.
ಎಸ್.ಎಸ್.ಎಲ್.ಸಿ ಯಲ್ಲಿ ಗುನಾತ್ಮಕ ಫಲಿತಾಂಶ ತರುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದ್ದು, ಫಲಿತಾಂಶ ವೃದ್ಧಿಗೊಳಿಸುವ ಶಿಕ್ಷಣ ಇಲಾಖೆಯ ವಿನೂತನ ಕಾರ್ಯಕ್ರಮಗಳಿಗೆ ಮಕ್ಕಳು ಸಾಕಾರಾತ್ಮಕವಾಗಿ ಸ್ಪಂದಿಸುವAತೆ ಶಿಕ್ಷಕರುಗಳು ನೋಡಿಕೊಳ್ಳಬೇಕು. ಕಷ್ಟಕರ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಒಲವು ಮೂಡುವಂತೆ ಮಾಡುವುದರೊಂದಿಗೆ, ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕು, ಕಲಿಕಾ ವಿಧಾನದ ಕುರಿತು ವಿದ್ಯಾರ್ಥಿಗಳಿಗೆ ಅರ್ಥವಾಗುವ ನಿಟ್ಟಿನಲ್ಲಿ ತಿಳಿಹೇಳಬೇಕು ಎಂದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸಲಿದ್ದು, ಪ್ರತಿಯೊಬ್ಬ ವ್ಯಕ್ತಿಯು ತಾನು ಎಷ್ಟೇ ಎತ್ತರಕ್ಕೆ ಬೆಳೆದರೂ ತನಗೆ ವಿದ್ಯೆ ಕಲಿಸಿದ ಗುರುಗಳನ್ನು ಮರೆಯುವುದಿಲ್ಲ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಬೇಕು. ಇಂತಹ ವಿದ್ಯಾರ್ಥಿಗಳ ಪಟ್ಟಿ ಮಾಡಿ ವಿಶೇಷ ಗಮನ ಹರಿಸಬೇಕು. ಪರೀಕ್ಷೆಯಲ್ಲಿ ಬರಬಹುದಾದ ಸಂಭಾವ್ಯ ಪ್ರಶ್ನೆಗಳ ಬಗ್ಗೆ ತಿಳಿ ಹೇಳಬೇಕು. ಮಾದರಿ ಪ್ರಶ್ನೆ ಪತ್ರಿಕೆ ಗಳನ್ನು ಬಿಡಿಸಿ ವಿವರಿಸಬೇಕು ಹಾಗ ವಿದ್ಯಾರ್ಥಿಗಳಿಗೆ ಸುಲಭ ರೀತಿಯಲ್ಲಿ ಮನದಟ್ಟು ಆಗುವಂತೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ 115 ಸರ್ಕಾರಿ, 68 ಅನುದಾನಿತ ಹಾಗೂ 91 ಅನುದಾನ ರಹಿತ ಸೇರಿದಂತೆ ಒಟ್ಟು 274 ಪ್ರೌಢಶಾಲೆಗಳು ಜಿಲ್ಲಾ ವಲಯದಲ್ಲಿ ಇದ್ದು, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 6880 ಬಾಲಕರು, 6600 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 13480 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ಪೂರ್ವ ಪರೀಕ್ಷೆ ಗಳನ್ನು ಎರಡು ಬಾರಿ ಮಾಡಲಾಗಿದ್ದು, ಶೇ. 77.77 ರಷ್ಟು ಫಲಿತಾಂಶ ವಿರುತ್ತದೆ. ರಾಜ್ಯಮಟ್ಟದ ಪೂರ್ವಭಾವಿ ಪರೀಕ್ಷೆಗೆ ಇನ್ನು 13 ದಿನಗಳು ಬಾಕಿಇದ್ದು, ವಿದ್ಯಾರ್ಥಿಗಳಲ್ಲಿ ಶಾಲಾ ಮಟ್ಟದಲ್ಲಿಯೇ ನಿಯಮತಿ ಪರೀಕ್ಷೆಗಳು, ಮರುಪಠಣ ತರಗತಿಗಳು ಹಾಗೂ ಪೋಷಕರೊಂದಿಗೆ ತರಗತಿಗಳು ಸೇರಿದಂತೆ ಸಮನ್ವಯ ಸಭೆಗಳನ್ನು ಸೇರಿಸುವ ಮೂಲಕ ಸಾಧನೆಯನ್ನು ಹೆಚ್ಚಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮ,ಆತನಾಡಿ,ನಾಗರಿಕ ಪ್ರಜ್ಞೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು, ಅವರು ಆತ್ಮವಿಶ್ವಾಸವನ್ನು ವೃದ್ಧಿಪಡಿಸುವುದರಿಂದ ಪ್ರತಿಶತಃ ನೂರರಷ್ಟು ಫಲಿತಾಂಶವನ್ನು ಪಡೆಯಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂಬುದು ಮುಖ್ಯವಲ್ಲ. ವಿಶೇಷ ದರ್ಜೆಯಲ್ಲಿ ಉತ್ತೀರ್ಣರಾಗುವುದು ಅಷ್ಟೇ ಮುಖ್ಯವಾಗಿರುತ್ತದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಗುಣಾತ್ಮಕ ಶಿಕ್ಷಣದ ವ್ಯವಸ್ಥೆಯ ಟಾಪ್ ಐದು ಎ ಗ್ರೇಡ್ನಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದೆ. ಇದನ್ನು ಮುಂದುವರೆಸಿಕೊಂಡು ಹೋಗುವಂತೆ ಮಾಡುವುದು ಶಿಕ್ಷಕರ ಹೊಣೆಗಾರಿಕೆಯಾಗಿದೆ ಎಂದ ಅವರು, ಯಾವುದೇ ವಿದ್ಯಾರ್ಥಿಗಳು ಶಾಲೆಯಿಂದ ದೂರವಿರದಂತೆ ನೋಡಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ, ಅವರುಗಳೊಂದಿಗೆ ಇದ್ದು, ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಐದು ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಸ್.ಎಸ್.ಎಲ್.ಸಿ ನೋಡೆಲ್ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕ ರಾಜೇಂದ್ರ ಭಟ್ ನಿರೂಪಿಸಿ, ಅಕ್ಷರ ದಾಸೋಹ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಾ ನಾಯಕ್ ವಂದಿಸಿದರು.











