ಕುಂದಾಪುರ ಮಿರರ್ ಸುದ್ದಿ…

ಕೋಟ : ಪ್ರವಾಸಕ್ಕೆ ಹೊರಟಿದ್ದ ಯುವಕರ ತಂಡ ಸಾಗುತ್ತಿದ್ದ ತೂಪನ್ ವಾಹನದ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ, ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದು ವಾಹನ ಪಲ್ಟಿ ಹೊಡೆದ ಘಟನೆ ಮಂಗಳವಾರ ಸಂಜೆ ಕೋಟ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಬೀದರ್ನಿಂದ ಪ್ರವಾಸಕ್ಕೆ ಹೊರಟಿದ್ದ 13 ಮಂದಿ ಯುವಕರ ತಂಡ ದಾವಣಗೆರೆ ಹಾಗೂ ಮುರ್ಡೇಶ್ವರ ಪ್ರವಾಸ ಮುಗಿಸಿ, ಮಂಗಳವಾರ ಮಧ್ಯಾಹ್ನ ಉಡುಪಿ ಶ್ರೀಕೃಷ್ಣ ಮಠದ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬ್ರಹ್ಮಾವರ ತಾಲೂಕಿನ ಕೋಟ ಬಸ್ ನಿಲ್ದಾಣ ಸಮೀಪ ತೂಪನ್ ವಾಹನದ ಟೈಯರ್ ಏಕಾಏಕಿ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ವಾಹನ ಡಿವೈಡರ್ ಹಾರಿ, ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಕಾರಿನ ಮೇಲೆಯೇ ಪಲ್ಟಿ ಹೊಡೆದಿದೆ.
ಅಪಘಾತದಲ್ಲಿ ತೂಪನ್ ವಾಹನ ಹಾಗೂ ಎರಡು ಕಾರುಗಳು ನಜ್ಜುಗುಜ್ಜಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಾಹನದಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.











