ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕುಂದಾಪುರ ಎಜುಕೇಶನ್ ಸೊಸೈಟಿ ಅಧೀನದ ಆರ್.ಎನ್ ಶೆಟ್ಟಿ ಸಂಯುಕ್ತ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇ. 99.1 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 328 ವಿದ್ಯಾರ್ಥಿಗಳಲ್ಲಿ 325 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 140 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 161 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 24 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದು ಗುಣಮಟ್ಟದ ಫಲಿತಾಂಶವಾಗಿದೆ. 140 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುವುದು ಮಹತ್ತರ ಸಾಧನೆಯಾಗಿದೆ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ.ಎಂ ಸುಕುಮಾರ್ ಶೆಟ್ಟಿ ಹೇಳಿದರು.
ಅವರು ಕುಂದಾಪುರದ ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ವಿಜ್ಞಾನ ವಿಭಾಗದಲ್ಲಿ 99.33% ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ 98.37% ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ 63 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, ವಾಣಿಜ್ಯ ವಿಭಾಗದಲ್ಲಿ 71 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 81 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ವಾಣಿಜ್ಯ ವಿಭಾಗದಲ್ಲಿ 80 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 18 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದರು.
ಸ್ನೇಹಾ 592 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 8ನೇ ಸ್ಥಾನಿಯಾಗಿ, ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಹಾಗೂ ಕಾಜಿ ಮೊಹಮ್ಮದ್ ರೈಹಾನ್ 590 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 10 ಸ್ಥಾನಿಯಾಗಿ ಕಾಲೇಜಿಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಕೌಶಿಕ್ ಎ ಶೆಟ್ಟಿ 585 ಅಂಕಗಳನ್ನು ಗಳಿಸಿ ಕಾಲೇಜಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕೃತಿ ಕೆ. ದೇವಾಡಿಗ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 8ನೇ ಸ್ಥಾನಿಯಾಗಿ, ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸಾನ್ವಿ ಜಿ ಪೂಜಾರಿ 589 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 12ನೇ ಸ್ಥಾನಿಯಾಗಿ, ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಶ್ರೀರಕ್ಷಾ 586 ಅಂಕ ಗಳಿಸಿ ತೃತೀಯ ಸ್ಥಾನಿಯಾಗಿದ್ದಾರೆ ಎಂದರು.
ವಿಕೆಆರ್ ಆಚಾರ್ಯ ಪ್ರೌಢಶಾಲೆ ಕೂಡಾ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೂಡಾ ಶೇ.100 ಫಲಿತಾಂಶ ಪಡೆಯಲಿದೆ. ಅದೇ ರೀತಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಕೂಡಾ ಉತ್ತಮ ಫಲಿತಾಂಶ ನೀಡುತ್ತಾ ಜಿಲ್ಲೆಯ ಪ್ರತಿಷ್ಠಿತ ಕಾಲೇಜಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಡಾ.ಬಿ.ಬಿ.ಕಾಲೇಜು ಪ್ರಾಂಶುಪಾಲರಾದ ಪ್ರೊ.ಡಾ.ಕೆ.ಉಮೇಶ ಶೆಟ್ಟಿ, ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನವೀನ ಶೆಟ್ಟಿ ಉಪಸ್ಥಿತರಿದ್ದರು.












