ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ವತಿಯಿಂದ ರಾಜ್ಯಮಟ್ಟದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ವಿದ್ಯಾರ್ಥಿವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

0
29

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.), ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ)ದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸಂಸ್ಥಾಪಕರಾದ ಮೊಳಹಳ್ಳಿ ದಿನೇಶ್ ಹೆಗ್ಡೆ ವಹಿಸಿದ್ದರು.

ಉದ್ಘಾಟಕರಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲರಾದ ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿವೇತನ ನೀಡುವ ಮೂಲಕ ಟ್ರಸ್ಟ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಾಧನೆಗೈದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂಬ ಸಂದೇಶವನ್ನು ಟ್ರಸ್ಟ್ ನೀಡುತ್ತಿದೆ ಎಂದು ಹೇಳಿದರು.

ಟ್ರಸ್ಟಿ ಸಂತೋಷ ಕಾಂಚನ್ ಪ್ರಾಸ್ತಾವಿಕವಾಗಿ ಮಾತನಾಡಿ, ಟ್ರಸ್ಟ್ ವತಿಯಿಂದ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇದುವರೆಗೆ ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳು ಮತ್ತು ಕೊಡುಗೆಗಳನ್ನು ವಿವರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಾತನಾಡಿ, ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಕುಂದಾಪುರ ಕ್ಷೇತ್ರದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು, ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಮಾನಸಿಕವಾಗಿ ಸಹಕಾರಿಯಾಗುವ ಕಾರ್ಯಕ್ರಮಗಳನ್ನು ಯಾವುದೇ ಅಪೇಕ್ಷೆಯಿಲ್ಲದೆ ನೀಡುತ್ತಿರುವುದು ಪ್ರಶಂಸನೀಯ ಎಂದರು.

ಅಭ್ಯಾಗತರಾಗಿ ಭಾಗವಹಿಸಿದ್ದ ನಿವೃತ್ತ ತೋಟಗಾರಿಕಾ ಇಲಾಖೆ ನಿರ್ದೇಶಕರಾದ ಶ್ರೀ ಜಯಶೀಲ ಶೆಟ್ಟಿ ಟ್ರಸ್ಟ್‌ನ ಕಾರ್ಯಚಟುವಟಿಕೆಗಳ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿ, ಪ್ರಾರಂಭದ ದಿನಗಳಿಂದ ಇಂದಿನವರೆಗೂ ಬೇಷರತ್ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಜಯರತ್ನ ಟ್ರಸ್ಟ್ ಇಂದು ಹೆಮ್ಮರವಾಗಿ ಬೆಳೆದು ಸಾವಿರಾರು ಜನರಿಗೆ ನೆರವಾಗುತ್ತಿದ್ದು, ಮೊಳಹಳ್ಳಿ ಗ್ರಾಮಕ್ಕೆ ಕೀರ್ತಿ ತಂದಿದೆ ಎಂದು ಶ್ಲಾಘಿಸಿದರು.

ಅತಿಥಿಗಳಾದ ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್ ಕಟ್ಟೆಯ ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್ ಬಿ. ಟ್ರಸ್ಟ್‌ನ ಸಮಾಜಮುಖಿ ಕಾರ್ಯಗಳು ಹಾಗೂ ವಿದ್ಯಾರ್ಥಿಗಳ ಕುರಿತಾದ ವಿಶೇಷ ಕಾಳಜಿ ಸಮಾಜದ ಏಳಿಗೆಗೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು. ಉಪಪ್ರಾಂಶುಪಾಲರಾದ ಕರುಣಾಕರ ಶೆಟ್ಟಿ ಟ್ರಸ್ಟ್‌ನಿಂದ ಶಾಲೆಗೆ ದೊರೆತಿರುವ ವಿವಿಧ ಸವಲತ್ತುಗಳನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಒಟ್ಟು 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರೀತಂ ಪೂಜಾರಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರ್ಯಾಂಕ್ ಗಳಿಸಿದ ಮಾನ್ಯ ಅವರಿಗೆ ತಲಾ ₹25,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಅಲ್ಲದೆ, ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ಕ್ರೀಡಾಪಟು ಗೌರವ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಎಂ. ಮಹೇಶ್ ಹೆಗ್ಡೆ (ಚೇರ್ಮನ್, ಎಕ್ಸಲೆಂಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್), ಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಫಲಾನುಭವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕರಾದ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ಎಂ.ಎನ್. ಸ್ವಾಗತಿಸಿದರು ಹಾಗೂ ಪದವೀಧರ ಶಿಕ್ಷಕರಾದ ಆದರ್ಶ್ ವಂದನಾರ್ಪಣೆ ಮಾಡಿದರು.

Click Here

LEAVE A REPLY

Please enter your comment!
Please enter your name here