ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಯಡಾಡಿ-ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿರುವ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಮತ್ತು ಚಿತ್ರಕಲಾ ಸ್ಪರ್ಧೆ “‘ವಾಲ್ಬೆಲ್ಲ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾನ್ಯ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರಿಗೆ ನೀಡಿ, ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು.
ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯರು,ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯರುಗಳಾದ ರಾಜೇಶ್ ಕೆ.ಸಿ, ಉದಯ ಶೆಟ್ಟಿ ಪಡುಕೆರೆ ಇವರು ಸಚಿವರನ್ನು ಭೇಟಿಯಾಗಿ ಅಧಿಕೃತವಾಗಿ ಆಮಂತ್ರಣ ನೀಡಿದರು.
ಜುಲೈ 6 ರಂದು ಕಾರ್ಯಕ್ರಮ ಉದ್ಘಾಟನೆ:
ಕುಂದಾಪ್ರ ನೆಲಮೂಲದ ಸಾಂಸ್ಕೃತಿಕ ಅನನ್ಯತೆಯ ರಂಗಾಭಿವ್ಯಕ್ತಿ ಹಾಗೂ ಚಿತ್ರಕಲಾ ಸ್ಪರ್ಧೆಯನ್ನೊಳಗೊಂಡ ಈ ವಿಶಿಷ್ಟ ‘ವಾಲ್ಬೆಲ್ಲ’ ಕಾರ್ಯಕ್ರಮವು ಜುಲೈ 06, 2026ರ ಸೋಮವಾರ ಬೆಳಿಗ್ಗೆ 9:30 ಕ್ಕೆ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ಜರುಗಲಿದೆ. ಈ ಸಂಭ್ರಮದ ಉದ್ಘಾಟನೆಯನ್ನು ಮಾನ್ಯ ಆರೋಗ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ನೆರವೇರಿಸಲಿದ್ದಾರೆ.
ಕುಂದಾಪ್ರ ಕನ್ನಡ ಭಾಷಿಕ ವಲಯದ ವ್ಯಾಪ್ತಿಗೆ ಬರುವ ಬೈಂದೂರು, ಕುಂದಾಪುರ, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕಿನ ಪ್ರೌಢಶಾಲೆ (ಹೈಸ್ಕೂಲು) ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪ್ರಾದೇಶಿಕ ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇದೊಂದು ಪ್ರಮುಖ ವೇದಿಕೆಯಾಗಿದೆ .












